ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ನೀಡಬೇಕು ಎಂದು ದಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮಂಗಳವಾರದಂದು ದೇಶದ ಸರ್ವೋಚ್ಚ ನ್ಯಾಯಾಲಯಕ್ಕೆ ತುರ್ತು ಅರ್ಜಿ ಸಲ್ಲಿಸಿದೆ.
ಪೌರತ್ವ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರ ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ ಮರುದಿನ ಮುಸ್ಲಿಂ ಲೀಗ್ ಸಂಘಟನೆಯು ಅದರ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯು ನಿರ್ದಿಷ್ಟವಾಗಿ ಮುಸ್ಲಿಮರ ವಿರುದ್ಧ ಅಸಾಂವಿಧಾನಿಕ ಹಾಗೂ ತಾರತಮ್ಯಕರವಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದೆ.
ಸದ್ಯದಲ್ಲೇ ಲೋಕಸಭಾ ಚುನಾವಣೆ ನಡೆಯಲಿದ್ದು, ಇಂತಹ ಹೊತ್ತಿನಲ್ಲಿ ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗೆ ಅನುಮತಿ ನೀಡಿರುವುದರಿಂದ ಕಾಯ್ದೆ ವಿವಾದ ಭುಗಿಲೆದ್ದಿದೆ.






































