ಕಾರ್ಕಳ : ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ, ನ್ಯಾಯವಾದಿಗಳ ಸಂಘ (ರಿ), ಕಾರ್ಕಳ ಮತ್ತು ಕುಕ್ಕುಂದೂರು ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಕುಕ್ಕುಂದೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಹಾಗೂ ಲಂಚ ನಿಷೇಧ ಕಾಯ್ದೆಯ ಕುರಿತು ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶೆ ಕೋಮಲ ಆರ್.ಸಿ.ಯವರು ಈ ಅರಿವು ಕಾರ್ಯಕ್ರಮವು ಗೌರವಾನ್ವಿತ ಕರ್ನಾಟಕ ಲೋಕಾಯುಕ್ತರ ನಿರ್ದೇಶನದಂತೆ ನಡೆಯುತ್ತಿದೆ. ಜನ ಸಾಮಾನ್ಯರ ಲೋಕಾಯುಕ್ತ ಕಾಯ್ದೆಯ ಬಗ್ಗೆ ಅಗತ್ಯ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಕಾರ್ಕಳ ನ್ಯಾಯವಾದಿಗಳ ಸಂಘದ ಜಂಟಿ ಕಾರ್ಯದರ್ಶಿ ವಸಂತಿ ಟಿ. ಬಂಗೇರಾ ಮಾತನಾಡಿ, ಸಮಾಜದಲ್ಲಿರುವ ತೊಡಕನ್ನು ನಿವಾರಿಸಲು ನಾವು ಸ್ವತಹಾ ಜಾಗ್ರತರಾಗಿರಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ವಕೀಲೆ ದೀಕ್ಷಾ ಮಾತನಾಡಿ ಯಾವುದೇ ಇಲಾಖೆಗಳಲ್ಲಿ ಲಂಚ ನೀಡಬೇಕಾದ ಪರಿಸ್ಥಿತಿ ಎದುರಾದಾಗ ತಕ್ಷಣ ಲೋಕಾಯುಕ್ತಕ್ಕೆ ಕರೆ ಮಾಡಿ ಈ ಕುರಿತು ದೂರು ನೀಡಬಹುದು. ದೂರಿಗೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಸಂಗ್ರಹಿಸಿಕೊಳ್ಳಬೇಕೆಂದರು.


























