ಮಂಗಳೂರು; ಮೋಸ್ಟ್ ವಾಟೆಂಡ್, ನಟೋರಿಯಸ್ ರೌಡಿ ಆಕಾಶಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ದಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.
ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು ಎನ್ನಲಾಗಿದೆ.
ಮಂಗಳೂರು ಪೊಲೀಸರು ರೌಡಿ ಶೀಟರ್ ಆಕಾಶಭವನ ಶರಣ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.






















