ಮಹಿಳಾ ಉದ್ಯೋಗಿಯ ಆತ್ಮಹತ್ಯೆ:ಮೇಲ್ವಿಚಾರಕನಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು

Picture of RB NEWS

RB NEWS

Bureau Report

ಬೆಂಗಳೂರು : ಉಡುಪಿಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮಹಿಳಾ ಉದ್ಯೋಗಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬ್ಯಾಂಕ್ ಮೇಲ್ವಿಚಾರಕ ಉದಯ ಕುಮಾರ್ ಶೆಟ್ಟಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಬ್ಯಾಂಕಿನ ಸಹಾಯಕ ಮ್ಯಾನೇಜರ್ ಆಗಿದ್ದ ಆಶಾ ಎಂಬುವರು 2024ರ ಮಾರ್ಚ್ 23ರಂದು ಆತ್ಮಹತ್ಯೆಗೈದಿದ್ದರು. ಈ ಬಗ್ಗೆ ಅವರ ಪತಿ ವಿಜಯ್ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನ್ನ ಪತ್ನಿ ಆಶಾ ಮಾರ್ಚ್ 23ರಂದು ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಆದರೆ, ಆ ದಿನ ಮಧ್ಯಾಹ್ನ 12.30ರ ಸುಮಾರಿಗೆ ಬ್ಯಾಂಕ್ ಮ್ಯಾನೇಜರ್ ಮಹೇಶ್ ರಾವ್ ಮಾಡಿ, ‘ನಿಮ್ಮ ಪತ್ನಿ ಕೆಲಸ ಮಧ್ಯಕ್ಕೆ ಬಿಟ್ಟು ಮನೆಗೆ ತೆರಳಿದ್ದಾರೆ’’ ಎಂದು ತಿಳಿಸಿದ್ದರು. ಕೂಡಲೇ ನಾನು ಮನೆಗೆ ತೆರಳಿ ನೋಡಿದಾಗ ಪತ್ನಿ ಕೋಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆದರೆ ದಾರಿ ಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ. ಬ್ಯಾಂಕ್ ಮೇಲ್ವಿಚಾರಕ ಉದಯ ಕುಮಾರ್ ಶೆಟ್ಟಿ, ಆಶಾ ಮೇಲೆ ಹಣದ ವಂಚನೆ ಆರೋಪ ಮಾಡಿದ್ದಲ್ಲದೇ ಹಣ ಮರುಪಾವತಿಗಾಗಿ ಒತ್ತಾಯಿಸುತ್ತಿದ್ದರು. ಹಣ ವಾಪಸ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಹೇಳಿದ್ದರು. ಇದರಿಂದಲೇ ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪತಿ ತನ್ನ ದೂರಿನಲ್ಲಿ ಆರೋಪಿಸಿದ್ದರು. ಇದರಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದು ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಪೊಲೀಸರು ಉದಯ ಕುಮಾರ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಿದ್ದರು. ಬಂಧನ ಭೀತಿ ಎದುರಾದ ಕಾರಣ ನಿರೀಕ್ಷಣಾ ಜಾಮೀನು ಕೋರಿ ಉದಯ ಕುಮಾರ್ ಕೋರ್ಟ್ ಮೊರೆ ಹೋಗಿದ್ದರು.

ನಿರೀಕ್ಷಣಾ ಜಾಮೀನು ಕೋರಿ ಉದಯಕುಮಾರ್ ಶೆಟ್ಟಿ ಸಲ್ಲಿಸಿದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಪೀಠ, ಅರ್ಜಿದಾರರು ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top