ವಿದ್ಯಾರ್ಥಿನಿ ಕೊಲೆ ಪ್ರಕರಣ : ಆರೋಪಿಯ ಬಂಧನ
ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ.

ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿ, ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ಪರಾರಿಯಾಗಿದ್ದ ಎನ್ನಲಾಗಿದೆ.
ಪೊಲೀಸರು ಆರೋಪಿಯ ಶೋಧ ಕಾರ್ಯ ತೀವ್ರಗೊಳಿಸಿದ ಹಂತದಲ್ಲೇ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವ್ಯಾಪಕ ಊಹಾಪೋಹಗಳು ಹಬ್ಬಿತ್ತು. ಆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಈ ಸುದ್ದಿಯನ್ನು ಅಲ್ಲಗಳೆದಿದ್ದರು.ಇದೀಗ ಆರೋಪಿಯ ಬಂಧನವಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಎಸ್ಪಿ ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

ಮಡಿಕೇರಿ : ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ನಡೆದ ಅಪ್ರಾಪ್ತಿಯ ಹತ್ಯೆ ಪ್ರಕರಣದ ಆರೋಪಿಯನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ.
ಬಾಲಕಿಯೊಂದಿಗೆ ವಿವಾಹ ಸಾಧ್ಯವಾಗದ ಹಿನ್ನೆಲೆ ಹತಾಶೆಯಿಂದ ಆರೋಪಿ ಪ್ರಕಾಶ್ ದುಷ್ಕೃತ್ಯ ಎಸಗಿದ್ದಾನೆ ಎಂದು ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಂಜೆ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಎಸ್ಪಿ, ಬಂಧಿತ ಆರೋಪಿ ಪ್ರಕಾಶ್ (ಓಂಕಾರಪ್ಪ)ನನ್ನು ವಿಚಾರಣೆಗೆ ಒಳಪಡಿಸಿ, ಹತ್ಯೆಗೊಳಗಾದ ಮೀನಾಳ ರುಂಡವನ್ನು ಕುಂಬಾರಗಡಿಗೆಯ ಆಕೆಯ ಮನೆಯಿಂದ ಸುಮಾರು 50 ರಿಂದ 100 ಮೀಟರ್ ದೂರದ ಮರಕಾಡುಗಳ ನಡುವೆ ಪತ್ತೆ ಮಾಡಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಲಾದ ಕತ್ತಿ ಮತ್ತು ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.





































