ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿಗೆ ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಮಾ.13ರ ಸಂಜೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.
ಈ ವೇಳೆ ಕಚೇರಿಯ ಅಧಿಕಾರಿಗಳು ಮತ್ತಿತರ ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದ್ದು, ಆ ಬಗ್ಗೆ ಸೂಕ್ತ ಉತ್ತರ ಸಿಕ್ಕಿಲ್ಲ. ಕಚೇರಿಯಲ್ಲಿ ಹಣದ ಬ್ಯಾಗ್ ಕೂಡ ಪತ್ತೆಯಾಗಿದೆ. ತಪಾಸಣೆಯ ಸಂದರ್ಭ ಸಾರ್ವಜನಿಕರು ಭ್ರಷ್ಟಾಚಾರ ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ದೀರ್ಘಕಾಲದಿಂದ ವಿಲೇವಾರಿಯಾಗದ ಹಲವು ಕಡತಗಳು ಸಿಕ್ಕಿರುತ್ತದೆ. ಅಧಿಕಾರಿಗಳು ಬೋಕರ್ಗಳೊಡನೆ ಫೋನ್ ಮೂಲಕ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಾಗಿ ಸಾಕ್ಷಿ ದೊರೆತಿರುತ್ತದೆ. ಈ ಹಿನ್ನಲೆಯಲ್ಲಿ ಮೂಡ ಕಚೇರಿ ಜಾಲದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾಹಿತಿ ನೀಡಿದ್ದಾರೆ.

ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಚಲುವರಾಜು ಬಿ, ಡಾ. ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ, ಸುರೇಶ್ ಕುಮಾರ್ ಪಿ. ಮತ್ತಿತರರು ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿದುಬಂದಿದೆ.






































