ವಾಲ್ಮೀಕಿ ನಿಗಮದಲ್ಲಿ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಣ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ಎಸ್ಐಟಿ ಟೀಂ, ಒಬ್ಬೊಬ್ಬರನ್ನೇ ಬಂಧಿಸಿ, ವಿಚಾರಣೆ ನಡೆಸುತ್ತಿದೆ.
ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಚಂದ್ರಶೇಖರನ್ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಎಂಡಿ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶುಚಿಸ್ಮಿತಾ ರವುಲ್ ಎಂಬುವರ ಪಾತ್ರವಿದೆ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದರು.
ಪ್ರತಿಪಕ್ಷಗಳು ನಾಗೇಂದ್ರ ಅವರ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ, ರಾಜಭವನ ಚಲೋ ಮಾಡಿ ರಾಜ್ಯಪಾಲರಿಗೆ ದೂರು ಸಹ ನೀಡಿದ್ದಾರೆ. ಇದರ ಬೆನ್ನಲ್ಲೇ ಈಗ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.







































