ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಲೂಟಿ: ಶಾಸಕ ವಿ.ಸುನೀಲ್ ಕುಮಾರ್
ಕಾರ್ಕಳ : ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ಶಾಸಕ ಹಾಗೂ ಭಾರತೀಯ ಜನತಾ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಲಭ್ಯ ಇರುವ ಎಲ್ಲ ಆದಾಯ ಮೂಲಗಳಿಂದ ಸರ್ಕಾರ ಜನರನ್ನು ಎಷ್ಟು ಸುಲಿಗೆ ಮಾಡಿದರೂ ರಾಜಸ್ವ ಸಂಗ್ರಹ ದಿನೇ ದಿನೇ ಕುಸಿದು ಬೀಳುತ್ತಿದೆ. ಈ ವರ್ಷದ ತೆರಿಗೆ ಸಂಗ್ರಹಣೆಯಲ್ಲಿ ಹದಿಮೂರು ಸಾವಿರ ಕೋಟಿ ಕೊರತೆ ಸೃಷ್ಟಿಯಾಗಿರುವುದರಿಂದ ರಾಜ್ಯ ಸರ್ಕಾರ ಧೂಮಕೇತುವಿನ ರೀತಿ ಜನಸಾಮಾನ್ಯರ ಮೇಲೆ ಎರಗಿದೆ.
ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ಇಂಧನ ದರ ಇಳಿಕೆಗಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಆದರೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಪೆಟ್ರೋಲ್ ಸೆಸ್ ಇಳಿಕೆ ಮಾಡಿದರೂ ಕರ್ನಾಟಕ ಸರ್ಕಾರ ಮಾತ್ರ ತೆಪ್ಪಗಿತ್ತು. ಬಜೆಟ್ ಗೆ ಮುನ್ನವೇ ಪೆಟ್ರೋಲಿಯಂ ಉತ್ಪನಗಳ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ.
ವೈದ್ಯಶಿಕ್ಷಣ ಸೇರಿದಂತೆ ವೃತ್ತಿ ಶಿಕ್ಷಣ ಶುಲ್ಕವನ್ನು ಶೇ.೧೦ರಷ್ಟು ಏರಿಕೆ ಮಾಡಿದ್ದ ಸರ್ಕಾರ ಪೆಟ್ರೋಲಿಗೆ ಬೆಂಕಿ ಹಚ್ಚಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯ.ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ಹಾಕುವುದು ಗ್ಯಾರಂಟಿ ಎಂದು ಶಾಸಕ ವಿ.ಸುನೀಲ್ ಕುಮಾರ್ ಲೇವಡಿ ಮಾಡಿದ್ದಾರೆ.






































