ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿಯ ಐಟಿ ಕಂಪನಿ ವಿರುದ್ಧ ಇದೀಗ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದೆ.
ಪಿಣರಾಯಿ ಅವರ ಪುತ್ರಿ ವೀಣಾ ವಿಜಯನ್ ಮುಂದಾಳತ್ವದ ಐಟಿ ಕಂಪನಿ ಹಾಗೂ ಇತರ ಕೆಲವರ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಖಾಸಗಿ ಖನಿಜ ಸಂಸ್ಥೆಯೊಂದು ಆಕೆಗೆ ಮತ್ತು ಕಂಪನಿಗೆ ಅಕ್ರಮವಾಗಿ ಪಾವತಿ ಮಾಡಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸಂಬಂಧಪಟ್ಟವರಿಗೆ ಸಮನ್ಸ್ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ತನಿಖಾ ವಿಭಾಗವಾದ ಗಂಭೀರ ವಂಚನೆ ತನಿಖಾ ಕಚೇರಿ (SFOI) ಸಲ್ಲಿಸಿದ ದೂರಿನ ಅರಿವು ಪಡೆದು ಇಡಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಹೇಳಲಾಗಿದೆ.
ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಎಂಬ ಖಾಸಗಿ ಕಂಪನಿಯು 2018ರಿಂದ 2019ರ ಅವಧಿಯಲ್ಲಿ ವೀಣಾ ಅವರ ಕಂಪನಿಯಾದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ಗೆ 1.72 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಪಾವತಿಸಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ತನಿಖೆಯಿಂದ ಪ್ರಕರಣವು ಬೆಳಕಿಗೆ ಬಂದಿದೆ. ಐಟಿ ಸಂಸ್ಥೆಯು ಕಂಪನಿಗೆ ಯಾವುದೇ ಸೇವೆಯನ್ನು ಒದಗಿಸಿಲ್ಲ. ಎಸ್ಎಫ್ಐಒ ಆರಂಭಿಸಿರುವ ತನಿಖೆಯ ವಿರುದ್ಧ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಕಳೆದ ತಿಂಗಳು ವಜಾಗೊಳಿಸಿತ್ತು ಎಂದು ವರದಿ ಉಲ್ಲೇಖಿಸಿದೆ,



































